
ತುಮಕೂರು: ಸಾಮಾನ್ಯ ಜನರ ಜೀವನ ಮಟ್ಟವನ್ನು ಸುಧಾರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ(ಡಿಎಲ್ಆರ್ಸಿ) ಹಾಗೂ ಜಿಲ್ಲಾ ಸಮಾಲೋಚನಾ ಸಭೆಯಲ್ಲಿ 2025-26ನೇ ಸಾಲಿನ ವಾರ್ಷಿಕ ಸಾಲ ಯೋಜನೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, 2024-25ರ ಸಾಲ ಯೋಜನೆಯಲ್ಲಿ ಶೇಕಡಾ 111ರಷ್ಟು ಸಾಲವನ್ನು ಆದ್ಯತಾ ವಲಯದಲ್ಲಿ ವಿತರಿಸಿರುವುದು ಉತ್ತಮ ಬೆಳವಣಿಗೆ. ಅದೇ ರೀತಿ 2025-26ರ ಸಾಲಿನಲ್ಲಿಯೂ ಸಹ ಗುರಿ ಮೀರಿ ಪ್ರಗತಿ ಸಾಧಿಸಲು ಸೂಚನೆ ನೀಡಿದರು.
ಕೇಂದ್ರ ಹಾಗು ರಾಜ್ಯ ಸರ್ಕಾರ ಪ್ರಾಯೋಜಿತ ಸಾಲ ಯೋಜನೆಗಳನ್ನು ಬ್ಯಾಂಕಿನವರು ನಿಗಧಿತ ಅವಧಿಯೊಳಗೆ ಅರ್ಹ ಫಲಾನುಭವಿಗೆ ವಿತರಿಸಿ ಹಳ್ಳಿಯಲ್ಲಿ ಆರ್ಥಿಕ ಸ್ವಾವಲಂಬಿನೆ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ವಿವಿಧ ಸಾಲ ಯೋಜನೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಬೇಕು. ಸಾಲದ ಅರ್ಜಿಗಳನ್ನು ವಿಲೇವಾರಿ ಮಾಡದೆ ಹೆಚ್ಚು ಕಾಲ ಬಾಕಿ ಉಳಿಸಿಕೊಳ್ಳುವ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಾರ್ಚ್ 2025ರ ಅಂತ್ಯಕ್ಕೆ ಸಿ.ಡಿ ಅನುಪಾತ (ಸಾಲ-ಠೇವಣಿ ಅನುಪಾತ) ಶೇಕಡಾ 105ರಷ್ಟಿದ್ದು, ಈ ಅನುಪಾತವನ್ನು ಪ್ರಸ್ತುತ ಸಾಲಿನಲ್ಲೂ ಮುಂದುವರಿಸಲು ತಿಳಿಸಿದರಲ್ಲದೆ, ಪ್ರಸ್ತುತ ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಸಾಲ ವಿತರಿಸಬೇಕು. ಯೋಜನೆಯ ಪ್ರಯೋಜನವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜನಜಾಗೃತಿ ಮೂಡಿಸಬೇಕು ಎಂದರು.
ಕೇAದ್ರ ಸರ್ಕಾರದ ಯೋಜನೆಗಳ ಬಗ್ಗೆ ರೈತರು, ಸಾಮಾನ್ಯ ಜನರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಮಾಹಿತಿಯೇ ಇರುವುದಿಲ್ಲ. ಸಾಲ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕ/ಯುವತಿಯರಿಗೆ ತರಬೇತಿ ನೀಡಬೇಕು. ಇದರಿಂದ ನಿರುದ್ಯೋಗ ಸಮಸ್ಯೆಯನ್ನು ದೂರ ಮಾಡಬಹುದು ಎಂದು ಹೇಳಿದರು.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು